ತಿರುಪತಿ, ಆ.14: ತಿರುಮಲ ಅಲಿಪಿರಿ ಮಾರ್ಗದಲ್ಲಿ ಚಿರತೆ ದಾಳಿಗೆ ಬಾಲಕಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಮಕ್ಕಳೊಂದಿಗೆ ಬೆಟ್ಟ ಹತ್ತುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ ಹೊಸ ನಿಯಮವನ್ನು ಪ್ರಕಟಿಸಿದೆ.
ಚಿರತೆ ದಾಳಿಗೆ ಆರು ವರ್ಷದ ಮಗು ಲಕ್ಷಿತ ಬಲಿಯಾದ ಪ್ರಕರಣದ ನಂತರ ಪೊಲೀಸರು ಬೆಟ್ಟ ಹತ್ತಲು ಮಕ್ಕಳನ್ನು ಕರೆದುಕೊಂಡು ಹೋಗುವ ಸಮಯದಲ್ಲಿ ಬದಲಾವಣೆ ಮಾಡಿದ್ದು, ಇದಕ್ಕಾಗಿ ಅಲಿಪಿರಿ ಹಾಗೂ ತಿರುಮಲ ನಡುವಿನ 7ನೇ ಮೈಲಿಯಲ್ಲಿ ಪೊಲೀಸ್ ಚೌಕಿಗಳನ್ನು ತೆರೆಯಲಾಗಿದೆ. ಇಲ್ಲಿ ಮಕ್ಕಳು ಹಾಗೂ ಶಿಶುಗಳ ಕೈಗೆ ಭದ್ರತಾ ಟ್ಯಾಗ್ ಅನ್ನು ಕಟ್ಟಿ ಕಳುಹಿಸಲಾಗುತ್ತಿದೆ. ಜತೆಗೆ 15 ವರ್ಷದೊಳಗಿನ ಮಕ್ಕಳನ್ನು ಬೆಟ್ಟ ಹತ್ತಲು ಕರೆದುಕೊಂಡು ಹೋಗುವವರಿಗೆ ಬೆಳಿಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಮಾತ್ರ ಸಮಯ ನಿಗದಿ ಮಾಡಿದೆ. ಜತೆಗೆ ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ದ್ವಿಚಕ್ರ ವಾಹನಗಳಿಗೆ ಘಾಟಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಶುಕ್ರವಾರ ಲಕ್ಷಿತಾ ಎಂಬ ಬಾಲಕಿ ತನ್ನ ಪೋಷಕರೊಂದಿಗೆ ಬೆಟ್ಟಕ್ಕೆ ತೆರಳುತ್ತಿದ್ದಾಗ ಚಿರತೆ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ತಿರುಪತಿಯ ಬೆಟ್ಟದ ದೇಗುಲಕ್ಕೆ ಹೋಗುವ ಪಾದಚಾರಿ ಮಾರ್ಗದ ಬಳಿಯ ಪೊದೆ ಪ್ರದೇಶದಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಈ ಹಿಂದೆ ಜೂನ್ನಲ್ಲಿ, ಮೂರು ವರ್ಷದ ಬಾಲಕ ಈ ಪ್ರದೇಶದಲ್ಲಿ ಚಿರತೆ ದಾಳಿಗೆ ಒಳಗಾಗಿದ್ದ, ಆದರೆ ಕ್ಷಣಾರ್ಧದಲ್ಲಿ ರಕ್ಷಿಸಲಾಗಿತ್ತು.
Comments